ನಾಯಕವಾಡಿ (ಜ,22) : ಸಂಸ್ಕಾರ ಭರಿತ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಲು ಖಂಡಿತ ಸಾಧ್ಯವಿದೆ . ಅದಕ್ಕೆ ತಕ್ಕ ಇಚ್ಚಾ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರದ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಅಭಿಪ್ರಾಯಪಟ್ಟರು.
ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ ನಮ್ಮಲ್ಲಿರುವ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಆ ನಿಟ್ಟಿನಲ್ಲಿ ಬೆಳೆದರೆ ಇಡೀ ಸಮಾಜ ತಿರುಗಿ ನೋಡುವಂತಹ ಅದ್ಭುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ. ಅದಕ್ಕೆ ಶ್ರೀ ಚೆನ್ನಬಸವೇಶ್ವರ ಯುವಕಮಂಡಲ ದವರು ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು. ಕೊಲ್ಲೂರು ಆರಕ್ಷಕ ಠಾಣಾ ಸಬ್ ಇನ್ಸ್ಪೆಕ್ಟರ್ ಸುಧಾರಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಿಗ್ಮ ಇನ್ಫೋ ಟೆಕ್ ನ ವಿನೋದ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿ ಶಿವ ಆರ್ ಪೂಜಾರಿ , ಉದ್ಯಮಿ ರಾಮನಾಥ್ ನಾಯಕ್ ಗಂಗೊಳ್ಳಿ, ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ, ಬೆಣಗೆರೆ ಶ್ರೀ ನಾಗ ದೇವಸ್ಥಾನದ ಅಧ್ಯಕ್ಷರಾದ ಉಮೇಶ್ ಎಲ್ ಮೇಸ್ತ, ಸಂಗಮೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ನಾರಾಯಣ ಕೆ ಗುಜ್ಜಾಡಿ, ಉದ್ಯಮಿ ವಾಸುದೇವ ಶೇರುಗಾರ್, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾದ ಉಪಾಧ್ಯಕ್ಷ ದಿನಕರ್ ಬಾಬು ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ಕೆ ಮೊದಲಾದವರು ಉಪಸ್ಥಿತರಿದ್ದರು.
ಚೆನ್ನಬಸವೇಶ್ವರ ಯುವಕ ಮಂಡಲದ ಅಧ್ಯಕ್ಷ ಶ್ರೀಧರ ಎನ್ ಪ್ರಾಸ್ತಾವಿಕ ಮಾತುಗಳನಾಡಿದರು ನಾಗರಾಜ್ ಎನ್ ಡಿ ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿವಿಧ ವಲಯದಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸಲಾಯಿತು. ಪಡುಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ ಸನ್ಮಾನಿತರನ್ನು ಪರಿಚಯಿಸಿದರು. ಮಂಜುನಾಥ ಹಿಲಿಯಾಣ ಕಾರ್ಯಕ್ರಮವನ್ನು ನಿರೂಪಿಸಿದರು. ನಿತೇಶ್ ಎನ್ ಡಿ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಜಾನಪದ ಜಾತ್ರೆ ಕಾರ್ಯಕ್ರಮ ನೆರವೇರಿತು.